ಅಮರವಾತಿ: ಬಂಗಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಕಾರಣ ಮುಂದಿನ ಮೂರು ದಿನಗಳ ಕಾಲ ಆಂಧ್ರಪ್ರದೇಶದಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಬುಧವಾರ ಹೇಳಿದೆ.
ಡಿ. 18, 19 ಹಾಗೂ 20ರಂದು ಆಂಧ್ರಪ್ರದೇಶದ ಉತ್ತರ ಮತ್ತು ದಕ್ಷಿಣ ಕರಾವಳಿ, ಯೆನಮ್ ಮತ್ತು ರಾಯಲಸೀಮಾ ಪ್ರದೇಶದಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿದೆ.
ಸರಾಸರಿ ಸಮುದ್ರ ಮಟ್ಟದಿಂದ 5.8 ಕಿ.ಮೀವರೆಗೆ ಚಂಡಮಾರುತ ಪರಿಚಲನೆ ವಿಸ್ತರಿಸಿರುವುದು ದೃಢವಾಗಿದೆ. ಚಂಡಮಾರುತ ಮುಂದಿನ 24 ಗಂಟೆಗಳಲ್ಲಿ ಉತ್ತರ ತಮಿಳುನಾಡು ಮತ್ತು ದಕ್ಷಿಣ ಆಂಧ್ರ ಪ್ರದೇಶ ಕರಾವಳಿಯ ಕಡೆಗೆ ವಾಯವ್ಯವಾಗಿ ಚಲಿಸುವ ಸಾಧ್ಯತೆಯಿದೆ. ಬಳಿಕ, ಮುಂದಿನ 24 ಗಂಟೆಗಳಲ್ಲಿ ಆಂಧ್ರಪ್ರದೇಶ ಕರಾವಳಿಯುದ್ದಕ್ಕೂ ಉತ್ತರದ ಕಡೆಗೆ ಚಲಿಸುವ ನಿರೀಕ್ಷೆಯಿದೆ’ ಎಂದು ಇಲಾಖೆ ಮಾಹಿತಿ ನೀಡಿದೆ.
ಕರ್ನಾಟಕದಲ್ಲಿ ಮಂಜು, ಸಾಧಾರಣ ಮಳೆ ಸಂಭವ
ಕರ್ನಾಟಕದಲ್ಲಿ ಮುಂದಿನ ಮೂರು ದಿನ ಒಣ ಹವೆ ಮುಂದುವರಿಯಲಿದ್ದು, ದಟ್ಟ ಮಂಜು ಮತ್ತು ಶೀತ ಗಾಳಿ ಇರಲಿದೆ ಎಂದು ಬೆಂಗಳೂರು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಕನಿಷ್ಠ ತಾಪಮಾನ 10 ಡಿಗ್ರಿ ದಾಖಲಾಗುವ ಸಾಧ್ಯತೆ ಇದೆ. ಡಿ.21 ರಂದು ಚಾಮರಾಜನಗರ, ತುಮಕೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ದಕ್ಷಿಣ ಒಳನಾಡು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.
Published by
